ಎಸ್‌‍ಐಆರ್‌ ಅರ್ಜಿ ಹಿಂತಿರುಗಿಸದಿದ್ದರೆ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ನಾಪತ್ತೆಯಾಗಲಿದೆ - ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಎಚ್ಚರಿಕೆ

Correspondent/Political/Karnataka/SM News Desk

Jul 14, 2026 - 14:34
 0  42
ಎಸ್‌‍ಐಆರ್‌ ಅರ್ಜಿ ಹಿಂತಿರುಗಿಸದಿದ್ದರೆ ಕರಡು ಮತದಾರರ ಪಟ್ಟಿಯಲ್ಲಿ  ಹೆಸರು ನಾಪತ್ತೆಯಾಗಲಿದೆ - ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಎಚ್ಚರಿಕೆ

ಬೆಂಗಳೂರು, ಜು.14 :  ಬೆಂಗಳೂರು ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌‍ಐಆರ್‌) ಪ್ರಕ್ರಿಯೆಯಲ್ಲಿ ಗಣತಿ ನಮೂನೆ ಭರ್ತಿ ಮಾಡಿ ಹಿಂತಿರುಗಿಸದ ಮತದಾರರ ಹೆಸರನ್ನು ಕರಡು ಮತದಾರರ ಪಟ್ಟಿಯಿಂದ ಕೈಬಿಡಲಾಗುವುದು ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಅಂಗವಾಗಿ ಬೂತ್‌ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದು, ಭರ್ತಿ ಮಾಡಿದ ನಮೂನೆಗಳನ್ನು ಮರಳಿ ಸಂಗ್ರಹಿಸಿ ಡಿಜಿಟಲೀಕರಣಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.ಮತದಾರರು ನಮೂನೆಯಲ್ಲಿ ಕೇಳಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ, ಅದನ್ನು ಕಡ್ಡಾಯವಾಗಿ ಸಂಬಂಧಿತ ಬಿಎಲ್‌ಒಗಳಿಗೆ ಮಾತ್ರ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.

ನಮೂನೆ ಭರ್ತಿ ಮಾಡುವ ವಿಧಾನವನ್ನು ತಿಳಿಯಲು ಭಾರತೀಯ ಚುನಾವಣಾ ಆಯೋಗದ ಅಧಿಕೃತ ಯೂಟ್ಯೂಬ್‌ ಚಾನೆಲ್‌ನಲ್ಲಿ ಲಭ್ಯವಿರುವ ಮಾರ್ಗದರ್ಶಿ ವಿಡಿಯೋಗಳನ್ನು ಸಾರ್ವಜನಿಕರು ವೀಕ್ಷಿಸಬಹುದು. ಹಂತ ಹಂತವಾಗಿ ಫಾರ್ಮ್‌ ಭರ್ತಿ ಮಾಡುವ ಮಾಹಿತಿ ಅಲ್ಲಿ ಲಭ್ಯವಿದೆ ಎಂದು ತಿಳಿಸಲಾಗಿದೆ.ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ನಿಖರತೆ ಕಾಯ್ದುಕೊಳ್ಳಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಬಿಎಲ್‌ಒಗಳು ನೀಡಿದ ಗಣತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸದಿದ್ದರೆ ಅಂತಹ ಮತದಾರರ ಹೆಸರನ್ನು ಕರಡು ಮತದಾರರ ಪಟ್ಟಿಯಿಂದ ಕೈಬಿಡಲಾಗುತ್ತದೆ. ಆದ್ದರಿಂದ ಸಾರ್ವಜನಿಕರು ಈ ಪ್ರಕ್ರಿಯೆಯನ್ನು ನಿರ್ಲಕ್ಷಿಸದೆ ಜವಾಬ್ದಾರಿಯಿಂದ ಸಹಕರಿಸಬೇಕು ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಮನವಿ ಮಾಡಿದ್ದಾರೆ.

ಎಸ್‌‍ಐಆರ್‌ ಪ್ರಕ್ರಿಯೆ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಭಾರತೀಯ ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್‌ಗಳನ್ನು ಸಾರ್ವಜನಿಕರು ವೀಕ್ಷಿಸಬಹುದು ಎಂದು ಅವರು ತಿಳಿಸಿದ್ದಾರೆ.